ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 28ರಿಂದ ಒಳನಾಡಿನಲ್ಲಿ ಹಾಗೂ ಏಪ್ರಿಲ್ 29ರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 26ರಂದು ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಗುಡುಗು ಮಿಂಚು ಸಹಿತ ಮಳೆಯಾಗಿದೆ.
ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, “ಸಮುದ್ರ ಮಟ್ಟದಿಂದ ಸುಮಾರು 0.9 ಕಿಲೋಮೀಟರ್ ಎತ್ತರದಲ್ಲಿ ಟ್ರಫ್ (Trough) ನಿರ್ಮಾಣವಾಗಿರುವುದರಿಂದ ಮಳೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಮುಂದಿನ ಒಂದು ವಾರ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ,” ಎಂದು ತಿಳಿಸಿದ್ದಾರೆ.
ಯಾವ ಭಾಗದಲ್ಲಿ, ಯಾವಾಗ ಮಳೆ?
- ಕರಾವಳಿ ಜಿಲ್ಲೆಗಳು: ಏಪ್ರಿಲ್ 26 ರಿಂದ ಮೇ 2ರವರೆಗೆ ಕರಾವಳಿ ಭಾಗದಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ.
- ಒಳನಾಡು ಪ್ರದೇಶ: ಸಂಜೆ ವೇಳೆಗೆ ಬಾಗಲಕೋಟೆ, ವಿಜಯಪುರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಏಪ್ರಿಲ್ 28, 29 ಮತ್ತು 30ರಂದು ಮಳೆಯ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗಲಿದೆ.
- ರಾಜಧಾನಿ ಬೆಂಗಳೂರು: ಏಪ್ರಿಲ್ 29 ರಿಂದ ಮೇ 2ರವರೆಗೆ ಬೆಂಗಳೂರು ನಗರದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಒಂದು ವಾರದವರೆಗೆ ನಗರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಿರುಗಾಳಿ ಎಚ್ಚರಿಕೆ ಮತ್ತು ಮಳೆಯ ವಿವರ ಮಳೆಯ ಜೊತೆಗೆ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ 1 ಸೆ.ಮೀ ಮತ್ತು ಶಿವಮೊಗ್ಗ ಜಿಲ್ಲೆಯ ಜಾಗರದಲ್ಲಿ 4 ಸೆ.ಮೀ ಮಳೆ ದಾಖಲಾಗಿದೆ.
ತಾಪಮಾನ ಏರಿಕೆ ಒಂದೆಡೆ ಮಳೆಯ ವಾತಾವರಣವಿದ್ದರೂ ರಾಜ್ಯದಲ್ಲಿ ತಾಪಮಾನ ಏರಿಕೆಯೂ ಮುಂದುವರಿದಿದೆ. ಕೊಪ್ಪಳದಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ 36 ಡಿಗ್ರಿ ಮತ್ತು ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದೆ.